ಮೈಸೂರಿನತ್ತ ಗಜಗಳ ಪಯಣ ; ದಿನಗಣನೆ ಆರಂಭ
ಈ ಬಾರಿಯ ದಸರಾದ ಜಂಬೂ ಸವಾರಿಯಲ್ಲಿ ಅಂಬಾರಿ ಹೊರುವ ಆನೆ ಯಾವುದು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿದ್ದಾನೆ. ಪೂರ್ವಭಾವಿ ಸಿದ್ದತೆಗಳು, ತಾಲೀಮು ಸಲುವಾಗಿ ಸದ್ಯದಲ್ಲಿಯೇ ಮೈಸೂರಿನತ್ತ ಗಜಪಯಣ ಆರಂಭವಾಗಲಿದೆ.
ಇದೇ ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣ ಶುರುವಾಲಿದೆ ಎಂದು ತಿಳಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಅಭಿಮನ್ಯು, ಕಂಜನ್ ಸೇರಿ 9 ಆನೆಗಳ ಮೊದಲ ಪಟ್ಟಿಯನ್ನುವಿಕಾಸಸೌಧದಲ್ಲಿ ಬಿಡುಗಡೆ ಮಾಡಿದರು.

ದಸರಾ ಮಹೋತ್ಸವ – 2025ದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಮುಂಚೂಣಿ ನಾಯಕ ಆಗಿರುತ್ತಾನೆ ಆಗಲಿದ್ದಾನೆ ಎಂದರು.
ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತ !
ಮತ್ತೀಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ. ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ, ಉನ್ನತಾಧಿಕಾರಿಗಳಾದ ಮಹೇಶ್ ಶಿರೂರ್, ಮನೋಜ್ ಕುಮಾರ್, ಮಾಲತಿ, ಪ್ರಭುಗೌಡ ಬಿರಾದಾರ್ ಇದ್ದರು.
